ತಿಪಟೂರು: ಮದುವೆ ಊಟ ಸೇವಿಸಿದ ಬಳಿಕ ಗ್ರಾಮಸ್ಥರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಮನಹಳ್ಳಿ ಗ್ರಾಮದ ಕುಮಾರಯ್ಯ ಅವರ ಮನೆಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಸುಮಾರು 150 ಮಂದಿ ಊಟ ಸೇವಿಸಿದ್ದರು. ಬಳಿಕ ಸುಮಾರು 40 ಮಂದಿಗೆ ವಾಂತಿ-ಭೇದಿ ಲಕ್ಷಣಗಳು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಲ್ಲಿ ಸುಮಾರು 35 ಮಂದಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. 16 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರನ್ನು ಹೃದಯ ಸಂಬಂಧಿ ಕಾಯಿಲೆ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಹಿನ್ನೆಲೆ ರಾಮನಹಳ್ಳಿ ಗ್ರಾಮದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಕ್ಲಿನಿಕ್ ತೆರೆಯಲಾಗಿದೆ.

ಶಾಸಕ ಕೆ. ಷಡಕ್ಷರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ತಾಲೂಕು ಆರೋಗ್ಯಾಧಿಕಾರಿ ಡಾ. ಚನ್ನಕೇಶವ, ವೈದ್ಯಾಧಿಕಾರಿ ಶಿವಕುಮಾರ್, ಡಿಎಸ್ಒ ರಾಮೇಗೌಡ ಸೇರಿದಂತೆ ಅನೇಕ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವರದಿ:ಮಂಜುನಾಥ್ ಹಾಲ್ಕುರಿಕೆ





