ತಿಪಟೂರು, ಆ. 1: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು.
ಕಿಬ್ಬನಹಳ್ಳಿ ಹೋಬಳಿಯ ರಜತಾದ್ರಿಪುರ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ, ಕಸಬಾ ಹೋಬಳಿಯ ಕೊಪ್ಪ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ದಸರೀಘಟ್ಟ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಗುರುಗದಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ, ರಟ್ಟೇನಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ ಹಾಗೂ ಹೂಲಿಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಹೂಲಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ. ಷಡಕ್ಷರಿ, ತಾಲೂಕಿಗೆ ಒಟ್ಟು ಏಳು ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮಂಜೂರಾಗಿದ್ದು, ಅವುಗಳಲ್ಲಿ ಐದು ಕಟ್ಟಡಗಳಿಗೆ ಈಗಾಗಲೇ ಭೂಮಿಪೂಜೆ ನೆರವೇರಿಸಲಾಗಿದೆ. ತಾಲೂಕಿನ ರಸ್ತೆ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನ್ಯಾಕೇನಹಳ್ಳಿ ಸುರೇಶ್, ದಸರೀಘಟ್ಟ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೊಪ್ಪ ಶಾಂತಪ್ಪ, ತಾಲೂಕು ಆರೋಗ್ಯಾಧಿಕಾರಿ ಚನ್ನಕೇಶವ, ಪಂಚಾಯತ್ ರಾಜ್ ಇಲಾಖೆಯ ಎಇಇ ನಾಗೇಂದ್ರಪ್ಪ, ಎಇ ಮೋನಿಕಾ, ಮುಖಂಡರಾದ ಸಿದ್ದಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ :ಮಂಜುನಾಥ್ ಹಾಲ್ಕುರಿಕೆ





